ಕುಮಟಾ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಕುಮಟಾ - ಶಿರಸಿ ಹೆದ್ದಾರಿಯಲ್ಲಿ ನೀರು ನುಗ್ಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
ಕತಗಾಲ ಬಳಿ ರಸ್ತೆಯಲ್ಲಿ ನೀರು ತುಂಬಿದ್ದು ಸಂಚಾರ ಸ್ಥಗಿತವಾಗಿದೆ. ಇಲ್ಲಿನ ಚಂಡಿಕಾ ಹೊಳೆಯಲ್ಲಿ ನೀರು ಹೆಚ್ಚಾಗಿದೆ. ರಸ್ತೆಯಲ್ಲಿ ತುಂಬಿದ್ದರಿಂದ ಬಸ್ ಸೇರಿದಂತೆ ಕೆಲ ವಾಹನಗಳು ಸಿಲುಕಿಕೊಂಡು ಸಂಚಾರ ಅಸ್ತವ್ಯಸ್ತವಾಗಿದೆ.
ಮಲೆನಾಡು ಸಿದ್ದಾಪುರದಲ್ಲಿ ಅಧಿಕ ಮಳೆ ಸುರಿಯುತ್ತಿರುವುದರಿಂದ ಹೊನ್ನಾವರದ ತಾಲೂಕಿನ ಗುಂಡಬಾಳ ನದಿಯಲ್ಲಿ ನೆರೆ ಪ್ರವಾಹ ಉಂಟಾಗಿದೆ. ಚಿಕ್ಕನಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಿಜನಕೇರಿ, ಹಿತ್ತಲಕೇರಿ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುನ್ನೆಚ್ಚರಿಕೆಯಾಗಿ ನಿವಾಸಿಗಳನ್ನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
ನದಿ ಪಾತ್ರದ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅನಿಲಗೋಡ್ ಜನತಾ ವಿದ್ಯಾಲಯ, ಹಿರಿಯ ಪ್ರಾಥಮಿಕ ಶಾಲೆ, ಗುಂಡಬಾಳ ಶಾಲೆ ನಂ-2, ಗುಂಡಿಬೈಲ್ ಶಾಲೆ ನಂ-2, ವಲ್ಕಿಯ ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್, ಗಂಜಿಗೆರೆ ಕಿರಿಯ ಪ್ರಾಥಮಿಕ ಶಾಲೆಗಳಿಗೆ ಡಿಸಿ ರಜೆ ಘೋಷಿಸಿದ್ದಾರೆ.
ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಇದರಿಂದ ಹೊನ್ನಾವರ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.