ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಬೆಂಗಳೂರು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿಯನ್ನು ರಕ್ಷಿಸಿದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಗೌತಮ್ ಕೆವಿ (17) ಎಂದು ಗುರುತಿಸಲಾಗಿದ್ದು, ಬದುಕುಳಿದ ವಿದ್ಯಾರ್ಥಿಯನ್ನು ಧನುಷ್ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಬೆಂಗಳೂರು ಜಾಲಹಳ್ಳಿ ಕ್ರಾಸ್ ವಿದ್ಯಾ ಸುಧಾ ಪಿಯು ಕಾಲೇಜ್ ನ 220 ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಭಾನುವಾರ ಬೆಳಗ್ಗೆ ಮುರ್ಡೇಶ್ವರ ಬೀಚ್ ತಲುಪಿದ್ದಾರೆ. ದೇವಸ್ಥಾನದ ಬಳಿ ಸಮುದ್ರಕ್ಕೆ ಇಳಿಯುವಂತಿಲ್ಲ ಎಂಬ ಕಾರಣಕ್ಕೆ ಈ ಜನರು ಪೊಲೀಸರ ಕಣ್ತಪ್ಪಿಸಿ ಸುಮಾರು ಒಂದೂವರೆ ಕಿ.ಮೀ ದೂರ ಸಮುದ್ರದಲ್ಲಿ ಈಜಲು ತೆರಳಿದ್ದರು ಎಂದು ಹೇಳಲಾಗುತ್ತಿದೆ. ಇದೇ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಸಿಲುಕಿದ್ದಾರೆ. ಅವರಲ್ಲಿ ಒಬ್ಬನನ್ನು ರಕ್ಷಿಸಲಾಯಿತು, ಆದರೆ ಇನ್ನೊಬ್ಬ ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.
ಸುಮಾರು ಒಂದೂವರೆ ತಾಸಿನ ನಂತರ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ಜೀವರಕ್ಷಕರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಲಭಿಸಿದ ತಕ್ಷಣ ಜೀವರಕ್ಷಕ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿ ಸಮುದ್ರದಲ್ಲಿ ಮುಳುಗಿದ್ದ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂದರ್ಭದಲ್ಲಿ ಜೀವರಕ್ಷಕರಾದ ಸಿದ್ಧಾರ್ಥ್, ಲೋಹಿತ್, ಚಂದ್ರಶೇಖರ್ ಇದ್ದರು.
ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವಿದ್ಯಾರ್ಥಿ ಗೌತಮ್ ದ್ವಿತೀಯ ಪಿಯುಸಿ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.