ಉತ್ತರ ಕನ್ನಡದಲ್ಲಿ ಆಸ್ತಿಗಳ ನೋಂದಣಿಗೆ ಇ-ಆಸ್ತಿ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ
ಕಾರವಾರ: ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದ್ದು, ಜಮೀನಿನ ಸರ್ವೆ ನಕ್ಷೆ (ಸ್ಕೆಚ್) ನಮೂನೆ 11ಇ ಇರುವ ನೋಜಿನ ತಂತ್ರಾಂಶದೊಂದಿಗೆ ಕೂಡ ಈ ಕಾವೇರಿ ತಂತ್ರಾಂಶವನ್ನು ಈಗಾಗಲೇ ಸಂಯೋಜಿಸಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಸಹ ಸಂಯೋಜಿಸಲಾಗಿದೆ.
ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶವನ್ನು ರೂಪಿಸಲಾಗಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಸಂಯೋಜನೆ ಮಾಡಿ ನೋಂದಣಿ ಮಾಡಲಾಗುತ್ತಿದೆ.
ನಗರಾಭಿವೃದ್ಧಿ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದ್ದು, ಈ ಮೂಲಕ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆದು ನೋಂದಾಯಿಸಬೇಕಾಗಿದೆ. ಅ. 7 ರಿಂದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ಈ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ, ಮತ್ತು ಇ-ಖಾತಾ ಪಡೆಯಲು ಇ-ಆಸ್ತಿ ತಂತ್ರಾಂಶವನ್ನು ಬಳಸಲಾಗುತ್ತದೆ.
ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ಸಂಬಂಧಿಸಿದ ಮೋಸದಿಂದ ತಪ್ಪಿಸಿಕೊಳ್ಳಬಹುದಾಗಿದೆ. ಇ-ಖಾತಾದ ಮೂಲಕ ಮಾತ್ರ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ. ಸ್ವತ್ತುಗಳ ನೈಜ ಮಾಲೀಕರಿಗೆ ನ್ಯಾಯ ದೊರಕಿಸಿ, ವಿವಾದಗಳು ಮತ್ತು ಕಾನೂನು ತೊಂದರೆಗಳನ್ನು ತಪ್ಪಿಸಲು ಈ ವ್ಯವಸ್ಥೆ ಸಹಾಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.